ಸುವರ್ಣಸೌಧ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಂಚಮಸಾಲಿ ಮುಖಂಡರು, ಮಠಾಧೀಶರು ಮಂಗಳವಾರ ಭೇಟಿ ಮಾಡಿ ಮೀಸಲಾತಿಗೆ ಆಗ್ರಹಿಸಿದರು. ಈ ವೇಳೆ ಪಂಚಮಸಾಲಿ ಸಮುದಾಯದಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತು ಅಧಿವೇಶನ ಮುಗಿದ ಕೂಡಲೇ ಕಾನೂನು ತಜ್ಞರು, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮತ್ತು ಅಡ್ವೊಕೇಟ್ ಜನರಲ್ ಜೊತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ನಡುವೆ ಮುಖ್ಯಮಂತ್ರಿಗಳ ಭರವಸೆಯಂತೆ ಅಧಿವೇಶನ ಮುಗಿಯುವವರೆಗೆ ಕಾಯಬೇಕೇ ಅಥವಾ ನಿಗದಿಯಂತೆ ಬುಧವಾರದಿಂದ ಪ್ರತಿಭಟನೆ ಹೋರಾಟ ಆರಂಭಿಸಬೇಕೇ ಎಂಬ ಬಗ್ಗೆ ಸಮುದಾಯದ ಮುಖಂಡರಲ್ಲಿ ಗೊಂದಲ ಮೂಡಿತು.
ಈ ವೇಳೆ ಮಾತನಾಡಿದ ಮೀಸಲು ಹೋರಾಟದ ನೇತೃತ್ವದ ವಹಿಸಿರುವ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಅವರು, ಕಳೆದ ಮೂರು ವರ್ಷಗಳಿಂದ ಪಕ್ಷಾತೀತವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸಮುದಾಯದ ಹಿತದೃಷ್ಟಿಯಿಂದ ಮುಂದೆಯೂ ಅದೇ ರೀತಿ ಎಲ್ಲರೂ ಒಟ್ಟಾಗಿ ಹೋರಾಟ ನಡೆಸುವುದು ಎಲ್ಲರಿಗೂ ಗೌರವ. ಬುಧವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಆಯೋಜಿಸಿರುವ ಸಮುದಾಯದ ಮುಖಂಡರ ಸಭೆಯಲ್ಲಿ ಭಾಗಿಯಾಗಿ, ಸರ್ಕಾರದ ಭರವಸೆಯಂತೆ ಅಧಿವೇಶನ ಮುಗಿಯುವವರೆಗೆ ಕಾಯಬೇಕೇ ಇಲ್ಲವೇ ಪ್ರತಿಭಟನೆ ನಡೆಸಬೇಕೆ ಎಂಬ ಬಗ್ಗೆ ನಿರ್ಧರಿಸೋಣ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಅರವಿಂದ ಬೆಲ್ಲದ್, ಬಿ.ಆರ್.ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ.ಪಾಟೀಲ್ ಮತ್ತಿತರರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ನಮ್ಮ ಬೇಡಿಕೆ ಈಡೇರಿಸಿ ಈ ಅಧಿವೇಶನದಲ್ಲೇ ಘೋಷಣೆ ಮಾಡಬೇಕೆಂದು ಮನವಿ ಮಾಡಿದರು.