ಹಾಸನ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ75 ರಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಪ್ರದೀಪ್ (30), ಗುರು (25) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಹೋಟೆಲ್ ಒಂದರ ಪೂಜೆಗೆ ಹೊರಟಿದ್ದ ವೇಳೆ, ಕೂಡಿಗೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆಯೇ ಟಿಂಬರ್ ತುಂಬಿದ್ದ ಲಾರಿ ನಿಂತಿತ್ತು. ಮುಂಜಾನೆ ಮಂಜು ಆವರಿಸಿದ್ದ ಕಾರಣ ಕಾರಿನ ಚಾಲಕನಿಗೆ ಲಾರಿ ನಿಂತಿರುವುದು ಗಮನಕ್ಕೆ ಬಂದಿಲ್ಲ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.