ಬೆಂಗಳೂರು: ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ (Hassana) ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಹೈಕೋರ್ಟ್ (High Court) ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.
2019ರ ಲೋಕಾಸಭಾ ಚುನಾವಣಾ (Lok Sabha Election) ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಬಿಜೆಪಿ ಅಭ್ಯರ್ಥಿ (BJP Candidate) ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಜ್ವಲ್ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಖೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.