ಹುಬ್ಬಳ್ಳಿ: ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದರು. ನಗರದಲ್ಲಿ ಮಾಧ್ಯವದರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ನಮ್ಮ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು. ದ್ವೇಷದ ರಾಜಕಾರಣ ಮಾಡುವವರು ಬಿಜೆಪಿಯವರು ಎಂದು ವಾಗ್ದಾಳಿ ಮಾಡಿದ್ದಾರೆ.
ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನೂ ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಹೆದರಿಸುವ ಮೂಲಕ ಕುಮಾರಸ್ವಾಮಿ ಹತಾಶರಾಗಿದ್ದಾರೆ. ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೇ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.