ಬೆಂಗಳೂರು: ಹೊಸದಾಗಿ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ಅರ್ಹ ಫಲಾನುಭವಿಗಳಿಗೆ ಹೊಸ ಕಾರ್ಡ್ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆ “ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ವಾ?” ಎಂದು ಶಾಸಕಿ ನಯನ ಮೋಟಮ್ಮ ಪ್ರಶ್ನಿಸಿದರು.
“ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು ಗ್ಯಾರಂಟಿಗಳಿಗೆ ಜನರ ಸಂಖ್ಯೆ ಹೆಚ್ಚಾಗಬಾರದು ಅಂತ ಬಿಪಿಎಲ್ ಕಾರ್ಡ್ ಕೊಡುತ್ತಿಲ್ವಾ? ಇದುವರೆಗೂ ಎಷ್ಟು ಬಿಪಿಎಲ್ ಕೊಟ್ಟಿದ್ದೀರಿ ತಿಳಿಸಿ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಆಗ್ರಹಿಸಿದರು.