ಬೆಂಗಳೂರು;- ಬೆಂಗಳೂರಿನ ಹೈಕೋರ್ಟ್ ಪೀಠವು ಖಾಸಗಿ ಬಸ್ಗಳಲ್ಲಿ ಧ್ವನಿ ಪ್ರಕಟಣೆ ಅಳವಡಿಸಲು ಸೂಚನೆ ನೀಡಿದೆ. ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ, ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ಗಳೂ ಕೂಡ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್ಗಳಲ್ಲಿ ವಿಶೇಷ ಚೇತನರ ಪ್ರಯಾಣಕ್ಕೆ ಅಗತ್ಯ ನೆರವನ್ನು ಕಲ್ಪಿಸಿಕೊಡಬೇಕಿದೆ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಈ ವಿಚಾರದಲ್ಲಿ ಸಾಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ. ಸರ್ಕಾರ ಖಾಸಗಿ ಬಸ್ ಆಪರೇಟರ್ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿ ಸುತ್ತೋಲೆ ಹೊರಡಿಸಬೇಕು. ಆ ನಿರ್ದೇಶನ ಹಾಲಿ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ಗಳಿಗೆ ಮಾತ್ರವಲ್ಲ, ಹೊಸದಾಗಿ ಪರ್ಮಿಟ್ ನೀಡುವ ಬಸ್ಗಳಿಗೂ ಅನ್ವಯವಾಗುವಂತೆ ಇರಬೇಕು ಎಂದು ನ್ಯಾಯಾಲಯ ತಾಕೀತು ಮಾಡಿತು.
ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ವಿಶೇಷ ಚೇತನ ಸ್ನೇಹಿ ಪ್ರಯಾಣಿಕರಿಗೆ ಅನುಕೂಲವಾಗವಂತೆ ಮೊಬೈಲ್ ಆಯಪ್ ಸಿದ್ಧಪಡಿಸುವಂತೆ ಮನವಿ ಸಲ್ಲಿಸಬೇಕು. ಅದನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿರುವ ನ್ಯಾಯಾಲಯ ನಾಲ್ಕು ವಾರ ವಿಚಾರಣೆ ಮುಂದೂಡಿದೆ.