ರಾಜ್ಯದಲ್ಲಿ ಹಿಜಾಬ್ ನಿಷೇಧದ ಆದೇಶ ವಾಪಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹಿಜಬ್‌ (Hijab) ನಿಷೇಧ ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಿಜಬ್‌ ನಿಷೇಧಿಸಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು.

ಉಡುಪು ಅವರವರ ಇಷ್ಟ. ಹಿಜಬ್ ನಿಷೇಧ ವಾಪಸ್‌ಗೆ ಹೇಳಿದ್ದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ತಿಳಿಸಿದರು. ಹಿಜಬ್‌ ನಿಷೇಧದ ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ‌ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿಪಡಿಸಲಿ? ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು ಎಂದು ಹೇಳಿದರು.

ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್-ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ? ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದು ಜನರಿಗೆ ಸಲಹೆ ನೀಡಿದರು.

Loading

Leave a Reply

Your email address will not be published. Required fields are marked *