ಬೆಳಗಾವಿ: ರಾಜ್ಯದಲ್ಲಿ ಕೆಲವೆಡೆ ಅತಿವೃಷ್ಠಿಯಿಂದ ಮನೆಗಳ ಹಾನಿ ಹಾಗೂ ಜಾನುವಾರುಗಳ ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಆದರೂ ರಾಜ್ಯ ಸರ್ಕಾರ ಗಮನಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರಹಾಕಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ಮಾಡುವುದು ಬಿಟ್ಟರೆ ಮಳೆಯಿಂದ ಆದ ಹಾನಿಗೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ. ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ ಕೊಡಬೇಕು, ಆದರೆ ಅದು ಆಗಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ. ಸರ್ಕಾರ ಹಾಗೂ ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ಕಿಡಿಕಾರಿದರು.
ಇನ್ನೂ ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ, ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ. ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ. ರಾಜ್ಯದ ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲಾ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು-ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದ್ದಾರೆ.